ಯೆಹೆಜ್ಕೇಲನು 15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಪ್ರಯೋಜನಕ್ಕೆ ಬಾರದ ದ್ರಾಕ್ಷಾಲತೆಯ ಸಾಮ್ಯ 1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 2 “ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು? 3 ಜನರು ದ್ರಾಕ್ಷಿಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವ ವಸ್ತುವನ್ನಾದರೂ ನೇತು ಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? 4 ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ. 5 ಅದು ಸಂಪೂರ್ಣವಾಗಿ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?” 6 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ. 7 ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು. 8 ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು” ಇದು ಕರ್ತನಾದ ಯೆಹೋವನ ನುಡಿ. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.