Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

1 ಪೂರ್ವಕಾಲ ವೃತ್ತಾಂತ 20 - ಕನ್ನಡ ಸತ್ಯವೇದವು C.L. Bible (BSI)


ದಾವೀದನ ಕೈವಶವಾದ ರಬ್ಬ ಪಟ್ಟಣ
( ೨ ಸಮು. 12:26-31 )

1 ಮರುವರ್ಷ, ಅರಸರು ಯುದ್ಧಕ್ಕೆ ಹೊರಡುವ ಕಾಲದಲ್ಲಿ ಯೋವಾಬನು ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅವನೊಡನೆ ಬಲವಾದ ಸೈನ್ಯವಿತ್ತು. ದಾವೀದನು ಜೆರುಸಲೇಮಿನಲ್ಲೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದನ್ನು ಹಾಳುಮಾಡಿಬಿಟ್ಟನು.

2 ದಾವೀದನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು; ಅದು ಸುಮಾರು ಮೂವತ್ತೈದು ಕಿಲೋಗ್ರಾಂ ತೂಕದ್ದು. ಅದರಲ್ಲಿ ಇದ್ದ ರತ್ನವನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಆ ಪಟ್ಟಣದಿಂದ ಅವನು ದೊಡ್ಡ ಕೊಳ್ಳೆಯನ್ನೇ ಕೊಂಡು ಹೊಯ್ದನು.

3 ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೆ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರೆಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.

4 ಬಳಿಕ ಫಿಲಿಷ್ಟಿಯರ ವಿರುದ್ಧ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದನು. ಫಿಲಿಷ್ಟಿಯರು ಇದರಿಂದ ಕುಗ್ಗಿಹೋದರು.

5 ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮ ಲಹ್ಮೀಯನನ್ನು ಕೊಂದನು. ಈ ಲಹ್ಮೀಯನ ಬರ್ಜಿಯ ಹಿಡಿಕೆ ನೇಕಾರರ ಕುಂಟೆಯಷ್ಟು ದೊಡ್ಡದಾಗಿತ್ತು.

6 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರದ ಪುರುಷ ಇದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳು ಇದ್ದವು. ಅವನೂ ರೆಫಾಯನು.

7 ಅವನು ಇಸ್ರಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.

8 ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕನಿಂದಲೂ ಹತರಾದರು.

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು