Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ದಾನಿಯೇಲ 7 - ಕನ್ನಡ ಸತ್ಯವೇದವು C.L. Bible (BSI)


ದಾನಿಯೇಲನು ಕಂಡ ಕನಸುಗಳು
( 7:1—12:13 )

1 ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಒಂದು ಕನಸು ಕಂಡನು. ಅವನ ಮನಸ್ಸಿಗೆ ಒಂದು ದೃಶ್ಯ ಕಾಣಿಸಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದಿಟ್ಟನು.

2 ಅದರ ಸಾರಾಂಶ ಇದು: ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿತ್ತು.

3 ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಆ ಸಾಗರದಿಂದ ಹೊರಗೆ ಬಂದವು.

4 ಮೊದಲು ಕಾಣಿಸಿದ ಮೃಗ ಸಿಂಹದ ಹಾಗಿತ್ತು. ಆದರೆ ಅದಕ್ಕೆ ಹದ್ದಿನಂಥ ರೆಕ್ಕೆಗಳಿದ್ದವು. ನಾನು ನೋಡುತ್ತಿರುವಾಗಲೆ ಆ ರೆಕ್ಕೆಗಳು ಕೀಳಲ್ಪಟ್ಟವು. ಆ ಮೃಗವನ್ನು ನೆಲದಿಂದ ಮೇಲಕ್ಕೆತ್ತಿ ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲಾಯಿತು. ಅದಕ್ಕೆ ಮನುಷ್ಯನ ಹೃದಯ ಕೊಡಲಾಯಿತು.

5 ಬಳಿಕ ಎರಡನೆಯ ಇನ್ನೊಂದು ಮೃಗವನ್ನು ಕಂಡೆ. ಅದು ಕರಡಿಯ ಹಾಗಿತ್ತು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿನ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. “ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು,” ಎಂದು ಅದಕ್ಕೆ ಹೇಳಲಾಯಿತು.

6 ಅನಂತರ ನಾನು ನೋಡುತ್ತಿರುವಾಗಲೆ ಚಿರತೆಯ ಹಾಗಿದ್ದ ಮತ್ತೊಂದು ಮೃಗ ಕಾಣಿಸಿತು. ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಗಳಂತಿರುವ ನಾಲ್ಕು ರೆಕ್ಕೆಗಳಿದ್ದವು. ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನ ಕೊಡಲಾಯಿತು.

7 ಇದಾದ ಬಳಿಕ ಆ ರಾತ್ರಿ ಕನಸಿನಲ್ಲಿ ಕಾಣಿಸಿಕೊಂಡ ನಾಲ್ಕನೇ ಮೃಗ ಭಯಂಕರವಾಗಿತ್ತು. ಹೆದರಿಸುವಂಥದಾಗಿತ್ತು. ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿತ್ತು. ಮಿಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಮುಂಚಿನ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.

8 ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಾಗಲೆ ಅವುಗಳ ನಡುವೆ ಇಗೋ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದಕ್ಕೆ ಎಡೆಮಾಡಿಕೊಡಲು ಮುಂಚಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಆಶ್ಚರ್ಯವೆಂದರೆ, ಆ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳಿದ್ದವು. ಬಡಾಯಿ ಕೊಚ್ಚಿಕೊಳ್ಳುವ ಬಾಯೂ ಇತ್ತು.


ಶಾಶ್ವತ ಜೀವಿಯಾದ ನರಪುತ್ರನ ದರ್ಶನ

9 ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.

10 ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.

11 ನಾನು ನೋಡುತ್ತಾ ಇದ್ದೆ: ಆ ಕಿರುಕೊಂಬು ಬಡಾಯಿಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.

12 ಮಿಕ್ಕ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವಾವಧಿಯನ್ನು ಉಳಿಸಿದರು.

13 ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.

14 ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಆ ದರ್ಶನದ ಅರ್ಥ

15 ದಾನಿಯೇಲನಾದ ನನ್ನ ಮನ ಒಳಗೇ ವ್ಯಥೆಗೊಂಡಿತು. ನನ್ನ ಮನಸ್ಸಿನಲ್ಲಿ ತೋಚಿದ ದರ್ಶನಗಳು ನನ್ನನ್ನು ಕಳವಳಪಡಿಸಿದವು.

16 ಹತ್ತಿರದಲ್ಲೆ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸರಿಯಾದ ಅರ್ಥ ಏನೆಂದು ವಿಚಾರಿಸಿದೆ.

17 ಅವನು ನನಗೆ: “ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರಗಳಿಂದ ಏರತಕ್ಕ ನಾಲ್ಕು ರಾಜ್ಯಗಳು.

18 ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.

19 ಅದಾದ ಮೇಲೆ ಇತರ ಮೃಗಗಳಿಗಿಂತ ವಿಲಕ್ಷಣವಾಗಿಯೂ ಅತಿಭಯಂಕರವಾಗಿಯೂ ಕಬ್ಬಿಣದ ಹಲ್ಲು, ಕಂಚಿನ ಉಗುರು ಉಳ್ಳದ್ದಾಗಿಯೂ ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿದ್ದ ಹಾಗು ಮಿಕ್ಕದ್ದನ್ನು ಕಾಲಿನಿಂದ ತುಳಿಯುತ್ತಿದ್ದ ಆ ನಾಲ್ಕನೆಯ ಮೃಗದ ವಿಷಯವನ್ನು ತಿಳಿದುಕೊಳ್ಳಲು ಬಯಸಿದೆ.

20 ಅದರ ತಲೆಯ ಮೇಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ,

21 ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲೆ ಕಣ್ಣುಳ್ಳದ್ದಾಗಿ ಬಡಾಯಿ ಕೊಚ್ಚಿಕೊಳ್ಳುವ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇತ್ತೋ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನೂ ತಿಳಿದುಕೊಳ್ಳಬೇಕೆಂದು ವಿಚಾರಿಸಿದೆ.

22 ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.

23 ಆಗ ಅವನು ನನಗೆ ಕೊಟ್ಟ ವಿವರ ಇದು: “ಆ ನಾಲ್ಕನೆಯ ಮೃಗ ಲೋಕದಲ್ಲಿ ತಲೆಯೆತ್ತುವ ನಾಲ್ಕನೆಯ ರಾಜ್ಯ. ಅದು ಮಿಕ್ಕ ರಾಜ್ಯಗಳಿಗಿಂತ ವಿಲಕ್ಷಣವಾದುದು. ಲೋಕವನ್ನೇ ಕಾಲಿನಿಂದ ತುಳಿದು ಚೂರುಚೂರು ಮಾಡಿ ಕಬಳಿಸುವುದು.

24 ಆ ಹತ್ತು ಕೊಂಬುಗಳು ಅದೇ ರಾಜ್ಯವನ್ನು ಆಳುವ ಹತ್ತುಮಂದಿ ಅರಸರು. ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮುಂಚಿನ ಅರಸರಿಗಿಂತ ವಿಲಕ್ಷಣವಾಗಿರುವನು, ಆ ಮೂವರು ಅರಸರನ್ನು ಸದೆಬಡಿದುಬಿಡುವನು.

25 ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.

26 ಆದರೆ (ದೇವರ) ನ್ಯಾಯಸಭೆ ತೀರ್ಪಿತ್ತು, ಅವನ ದೊರೆತನವನ್ನು ಕಿತ್ತು, ವಿನಾಶಮಾಡಿ, ಕೊನೆಗಾಣಿಸಿಬಿಡುವುದು.

27 ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.

28 ಇಲ್ಲಿಗೆ ಆ ಕನಸಿನ ವಿವರ ಮುಗಿಯಿತು. ದಾನಿಯೇಲನಾದ ನಾನು ನನ್ನ ಆಲೋಚನೆಗಳಿಂದ ಬಹಳ ಕಳವಳಗೊಂಡೆ. ನನ್ನ ಮುಖ ಬಾಡಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲೇ ಇಟ್ಟುಕೊಂಡೆ.

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು