ವಿಮೋಚನಕಾಂಡ 40 - ಕನ್ನಡ ಸತ್ಯವೇದವು C.L. Bible (BSI)ಗುಡಾರದ ಪ್ರತಿಷ್ಠಾಪನೆ 1 ಸರ್ವೇಶ್ವರ ಸ್ವಾಮಿ ಮೋಶೆಗೆ: 2 “ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ನೀನು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸು. 3 ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡು. 4 ಆ ಮೇಲೆಮೇಜನ್ನು ತರಿಸಿ ಅದರ ಮೇಲಿಡಬೇಕಾದುದನ್ನು ಸರಿಯಾಗಿ ಇಡು. ದೀಪವೃಕ್ಷವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿಡು. 5 ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಕೆಯನ್ನು ಇಟ್ಟು, ಗುಡಾರದ ಬಾಗಿಲಲ್ಲಿ ಪರದೆಯನ್ನು ಕಟ್ಟು. 6 ದೇವದರ್ಶನದ ಗುಡಾರದ ಬಾಗಿಲಿನ ಮುಂದುಗಡೆಯಲ್ಲಿ ಬಲಿಪೀಠವನ್ನು ಇಡು. 7 ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ನೀರು ತೊಟ್ಟಿಯನ್ನಿಟ್ಟು ಅದರಲ್ಲಿ ನೀರನ್ನು ತುಂಬಿಸು. 8 ಅಂಗಳದ ಸುತ್ತಲೂ ಆವರಣವನ್ನು ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ತೂಗುಬಿಡು. 9 ಬಳಿಕ ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿ ಇರುವುದೆಲ್ಲವನ್ನೂ ಅದರ ಎಲ್ಲ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಾಪಿಸು. ಅಂದಿನಿಂದ ಅದು ಪರಿಶುದ್ಧವಾಗಿರುವುದು. 10 ಬಲಿಪೀಠವನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಬಲಿಪೀಠವನ್ನು ಪ್ರತಿಷ್ಠಾಪಿಸು. ಅದು ಪರಮಪವಿತ್ರವಾಗಿರಬೇಕು. 11 ನೀರು ತೊಟ್ಟಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಾಪಿಸು. 12 “ಅದಲ್ಲದೆ ಆರೋನನನ್ನು ಮತ್ತು ಅವನ ಮಕ್ಕಳನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ ಅವರನ್ನು ಸ್ನಾನಮಾಡಿಸು. 13 ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಆ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಾಪಿಸು. 14 ಅನಂತರ ಅವನ ಮಕ್ಕಳನ್ನು ಬರಮಾಡು. 15 ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನು ಕೂಡ ಅಭಿಷೇಕಿಸು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು,” ಎಂದು ಹೇಳಿದರು. 16 ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು. 17 ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ಮೋಶೆ ಗುಡಾರವನ್ನು ಎತ್ತಿ ನಿಲ್ಲಿಸಿದನು. 18 ಅವನು ಗುಡಾರವನ್ನು ಎತ್ತಿಸಿ ಅದರ ಗದ್ದಿಗೇಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು. 19 ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿದನು. ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಅದೆಲ್ಲವನ್ನು ಮಾಡಿದನು. 20 ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಗದ್ದಿಗೆಗಳನ್ನು ಕೊಟ್ಟು ಅದರ ಮೇಲೆ ಕೃಪಾಸನವನ್ನಿಟ್ಟು, 21 ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ತೆರೆಯನ್ನು ಇರಿಸಿ, ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು. 22 ಅದಲ್ಲದೆ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರಕಡೆಯಲ್ಲಿ ತೆರೆಯ ಹೊರಗಡೆ ಮೇಜನ್ನು ಇಟ್ಟು 23 ಅದರ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿ ರೊಟ್ಟಿಗಳನ್ನು ಕ್ರಮವಾಗಿ ಇರಿಸಿದನು. 24 ಸರ್ವೇಶ್ವರ ಆಜ್ಞಾಪಿಸಿದಂತೆಯೇ ಅವನು ದೀಪವೃಕ್ಷವನ್ನು ದೇವದರ್ಶನದ ಗುಡಾರದೊಳಗೆ ಮೇಜಿನ ಎದುರಾಗಿ ಗುಡಾರದ ದಕ್ಷಿಣಕಡೆಯಲ್ಲಿ ಇಟ್ಟು 25 ಅದರ ಹಣತೆಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು. 26 ಸರ್ವೇಶ್ವರ ಆಜ್ಞಾಪಿಸಿದಂತೆ ಚಿನ್ನದ ಧೂಪವೇದಿಕೆಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಮುಂದೆ ಇಟ್ಟು 27 ಅದರ ಮೇಲೆ ಪರಿಮಳದ್ರವ್ಯಗಳ ಧೂಪವನ್ನು ಹಾಕಿದನು; 28 ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿದನು. 29 ಸರ್ವೇಶ್ವರ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠವನ್ನಿಟ್ಟು ಅದರ ಮೇಲೆ ದಹನಬಲಿಯನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. 30 ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ಅದರಲ್ಲಿ ನೀರು ತುಂಬಿಸಿದನು. 31 ಅದರಲ್ಲಿ ಮೋಶೆಯೂ 32 ಆರೋನನೂ ಅವನ ಮಕ್ಕಳೂ ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಬಲಿಪೀಠದ ಸೇವೆಗೆ ಬಂದಾಗಲೂ ಕೈಕಾಲುಗಳನ್ನು ತೊಳೆದುಕೊಳ್ಳುವರು. 33 ಗುಡಾರ ಹಾಗು ಬಲಿಪೀಠದ ಸುತ್ತಲು ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು. ಗುಡಾರವನ್ನು ಆವರಿಸಿದ ಮೋಡ ( ಸಂಖ್ಯಾ. 9:15-23 ) 34 ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು. 35 ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿರುವುದರಿಂದಲೂ ಸರ್ವೇಶ್ವರನ ತೇಜಸ್ಸು ಗುಡಾರದೊಳಗೆ ತುಂಬಿದ್ದುದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು. 36 ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣ ಮಾಡುತ್ತಿದ್ದರು. 37 ಆ ಮೇಘವು ಬಿಡದೆ ಇರುವಾಗ ಅದು ಬಿಡುವ ತನಕ ಪ್ರಯಾಣಮಾಡದೆ ಇರುತ್ತಿದ್ದರು. 38 ಇಸ್ರಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣ ಮುಂದೆ ಹಗಲುಹೊತ್ತಿನಲ್ಲಿ ಸರ್ವೇಶ್ವರನ ಮೇಘವು ಗುಡಾರದ ಮೇಲೆ ಇತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು. |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India