1 ತಿಮೊಥೆಯನಿಗೆ 6 - ಕನ್ನಡ ಸತ್ಯವೇದವು J.V. (BSI)ದಾಸರಾಗಿ ಮತ್ತೊಬ್ಬರ ಅಧೀನದಲ್ಲಿರುವ ಕ್ರೈಸ್ತರ ಧರ್ಮ 1 ದಾಸರಾಗಿ ಮತ್ತೊಬ್ಬರ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ಮಾನಕ್ಕೂ ಯೋಗ್ಯರೆಂದೆಣಿಸಲಿ; ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದೆ ಉಂಟಾದೀತು. 2 ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ ತಮ್ಮ ಸೇವೆಯ ಫಲವನ್ನು ಹೊಂದುವವರು ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು. ತಿಮೊಥೆಯನು ತಪ್ಪಾದ ಬೋಧನೆಗೂ ಹಣದಾಶೆಗೂ ದೂರವಾಗಿದ್ದು ಸದ್ಧರ್ಮವನ್ನು ಅನುಸರಿಸುವವನೂ ಬೋಧಿಸುವವನೂ ಆಗಿರಬೇಕೆಂದು ಖಂಡಿತವಾದ ಎಚ್ಚರಿಕೆಯು 3 ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಉಪದೇಶಕ್ಕೂ ಸಮ್ಮತಿಸದೆ ಹೋದರೆ 4 ಅವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಮದದಿಂದ ಕಣ್ಣುಗಾಣದವನಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ. 5 ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವ ಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ. 6 ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. 7 ನಾವು ಲೋಕದೊಳಕ್ಕೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು. 8 ನಮಗೆ ಅನ್ನವಸ್ತ್ರಗಳಿದ್ದರೆ ಸಾಕು; 9 ಐಶ್ವರ್ಯವಂತರಾಗಬೇಕೆಂದು ಮನಸ್ಸು ಮಾಡುವವರು ದುಷ್ಪ್ರೇರಣೆಯೆಂಬ ಉರ್ಲಿನಲ್ಲಿ ಸಿಕ್ಕಿಕೊಂಡು ಬುದ್ಧಿವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರನಾಶನಗಳಲ್ಲಿ ಮುಳುಗಿಸುತ್ತವೆ. 10 ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ. 11 ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು; ನೀತಿ ಭಕ್ತಿ ನಂಬಿಕೆ ಪ್ರೀತಿ ಸ್ಥಿರಚಿತ್ತ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವದಕ್ಕೆ ಪ್ರಯಾಸಪಡು. 12 ಕ್ರಿಸ್ತ ನಂಬಿಕೆಯುಳ್ಳವರು ಮಾಡತಕ್ಕ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿ ದೇವರು ನಿನ್ನನ್ನು ಕರೆದನು, ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ. 13 ಸರ್ವಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ - 14 ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ನೀನು ಸುವಾರ್ತೆಯ ವಿಧಿಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಬೇಕು. 15 ಭಾಗ್ಯವಂತನಾದ ಏಕಾಧಿಪತಿಯು ತನ್ನ ಕ್ಲುಪ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು ರಾಜಾಧಿರಾಜನೂ ಕರ್ತರ ಕರ್ತನೂ 16 ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ; ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು; ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಇರಲಿ. ಆಮೆನ್. 17 ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ 18-19 ನಿರೀಕ್ಷೆಯನ್ನಿಡಬೇಕೆಂತಲೂ ವಾಸ್ತವವಾದ ಜೀವವನ್ನು ಹೊಂದುವದಕ್ಕೋಸ್ಕರ ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ದಾನಧರ್ಮಗಳನ್ನು ಮಾಡುವವರೂ ಪರೋಪಕಾರಮಾಡುವವರೂ ಆಗಿದ್ದು ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ಅವರಿಗೆ ಆಜ್ಞಾಪಿಸು. 20 ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವದನ್ನೇ ಕಾಪಾಡು. 21 ಕೆಲವರು ಆ ಸುಳ್ಳಾದ ಜ್ಞಾನವನ್ನು ಅವಲಂಬಿಸಿ ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾದರು. ಕೃಪೆಯು ನಿಮ್ಮೊಂದಿಗೆ ಇರಲಿ. |
Kannada J.V. Bible © The Bible Society of India, 2016.
Used by permission. All rights reserved worldwide.
Bible Society of India