Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

2 ಸಮುಯೇಲ 6 - ಕನ್ನಡ ಸತ್ಯವೇದವು J.V. (BSI)


ದಾವೀದನು ಯೆಹೋವನ ಮಂಜೂಷವನ್ನು ಚೀಯೋನಿಗೆ ತಂದದ್ದು

1 ಅನಂತರ ದಾವೀದನು ಇಸ್ರಾಯೇಲ್ಯರಲ್ಲಿ ಮೂವತ್ತುಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು

2 ದೇವರ ಮಂಜೂಷವನ್ನು ತರುವದಕ್ಕಾಗಿ ಅವರೆಲ್ಲರ ಸಹಿತ ಯೆಹೂದದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾದದ್ದು.

3 ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಬಂಡಿಯನ್ನು ಹೊಡೆದರು.

4 ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲ್ಪಟ್ಟ ದೇವರ ಮಂಜೂಷದ ಮುಂದೆ ಅಹಿಯೋವನು ಹೋಗುತ್ತಿದ್ದನು.

5 ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತಗಳನ್ನು ಹಾಡುತ್ತಾ ಯೆಹೋವನ ಮುಂದೆ ನರ್ತನಮಾಡುತ್ತಾ ಹೋದರು.

6 ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.

7 ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಈ ತಪ್ಪಿನ ಸಲವಾಗಿ ಅವನನ್ನು ಹತಮಾಡಿದನು; ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.

8 ಯೆಹೋವನು ಉಜ್ಜನನ್ನು ಮುರಿದುಬಿಟ್ಟದ್ದರಿಂದ ದಾವೀದನು ಉರಿಗೊಂಡು ಆ ಸ್ಥಳಕ್ಕೆ ಪೆರೆಚುಜ್ಜಾ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.

9 ಆ ದಿವಸ ದಾವೀದನು ಯೆಹೋವನಿಗೆ ಭಯಪಟ್ಟು - ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವದು ಹೇಗೆ ಎಂದುಕೊಂಡು

10 ಅದನ್ನು ದಾವೀದ ನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.

11 ಯೆಹೋವನ ಮಂಜೂಷವು ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದನು.

12 ಯೆಹೋವನು ಹೀಗೆ ತನ್ನ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದನಗರಕ್ಕೆ ತಂದನು.

13 ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.

14 ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.

15 ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಆರ್ಭಟಿಸುತ್ತಾ ತುತೂರಿ ಊದುತ್ತಾ ಯೆಹೋವನ ಮಂಜೂಷವನ್ನು ತಂದರು.

16 ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹಣಿಕಿ ನೋಡಿ ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ ಕುಣಿಯುತ್ತಾ ಇರುವದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.

17 ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯವಿುತ ಸ್ಥಳದಲ್ಲಿಟ್ಟರು; ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.

18 ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಿಂದ ಎಲ್ಲರನ್ನೂ ಆಶೀರ್ವದಿಸಿ

19 ಸಭೆಯಾಗಿ ನೆರೆದು ಬಂದಿರುವ ಇಸ್ರಾಯೇಲ್ಯರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ದ್ರಾಕ್ಷೇ ಹಣ್ಣಿನ ಉಂಡೆಯನ್ನೂ ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮತಮ್ಮ ಮನೆಗಳಿಗೆ ಹೋದರು.

20 ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು - ಈ ಹೊತ್ತು ಇಸ್ರಾಯೇಲ್ಯರ ಅರಸನು ಎಂಥ ಗೌರವದಿಂದ ನಡೆದುಕೊಂಡನು! ನೀಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ ಅಂದಳು. ಆಗ ದಾವೀದನು ಆಕೆಗೆ -

21 ಯೆಹೋವನ ಸನ್ನಿಧಿಯಲ್ಲಿಯಷ್ಟೆ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟು ನನ್ನನ್ನೇ ಆರಿಸಿಕೊಂಡು ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಕುಣಿದಾಡುವೆನು.

22 ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರಹೊಂದುವದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು ಅಂದನು.

23 ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವವರೆಗೂ ಮಕ್ಕಳೇ ಆಗಲಿಲ್ಲ.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು