ಕೀರ್ತನೆಗಳು 57 - ಕನ್ನಡ ಸತ್ಯವೇದವು J.V. (BSI)ಶತ್ರುಬಾಧಿತನಾದ ಸದ್ಭಕ್ತನ ವಿಜ್ಞಾಪನೆಯೂ ಸ್ತೋತ್ರವೂ ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ ( 1 ಸಮು. 22.1 , 24.3 ) 1 ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು. 2 ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಿದ್ಧಿಗೆ ತರುವ ದೇವರನ್ನು ಕೂಗಿಕೊಳ್ಳುವೆನು. 3 ಆತನು ಪರಲೋಕದಿಂದ ಸಹಾಯಮಾಡಿ ನಿಂದಕರ ಬಾಯಿಗೆ ನನ್ನನ್ನು ತಪ್ಪಿಸುವನು; ಸೆಲಾ. ತನ್ನ ಕಾರುಣ್ಯವನ್ನೂ ಸತ್ಯತೆಯನ್ನೂ ತೋರ್ಪಡಿಸುವನು. 4 ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಶಸ್ತ್ರಬಾಣಗಳು; ನಾಲಿಗೆಗಳು ಹದವಾದ ಕತ್ತಿಗಳೇ. 5 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. 6 ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ. 7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ಬಾರಿಸುತ್ತಾ ಹಾಡುವೆನು. 8 ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಮುಂಗೊಳ್ಳುವೆನು. 9 ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು. 10 ಯಾಕಂದರೆ ನಿನ್ನ ಕೃಪೆಯು ಆಕಾಶವನ್ನೂ ನಿನ್ನ ಸತ್ಯತೆಯು ಮುಗಿಲನ್ನೂ ನಿಲುಕುವಷ್ಟು ದೊಡ್ಡವಾಗಿವೆ. 11 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. |
Kannada J.V. Bible © The Bible Society of India, 2016.
Used by permission. All rights reserved worldwide.
Bible Society of India