ಜ್ಞಾನೋಕ್ತಿಗಳು 23 - ಕನ್ನಡ ಸತ್ಯವೇದವು J.V. (BSI)1 ನೀನು ಅಧಿಪತಿಯ ಸಂಗಡ ಊಟಕ್ಕೆ ಕೂತಿರುವಾಗ ಯಾರ ಸನ್ನಿಧಾನದಲ್ಲಿದ್ದೇನೆಂಬದನ್ನು ಮರೆಯದಿರು. 2 ನೀನು ಹೊಟ್ಟೆಬಾಕನಾಗಿದ್ದರೆ ಕಂಠಕ್ಕೆ ಕತ್ತಿಹಾಕಿಕೋ. 3 ಅವನ ರುಚಿಪದಾರ್ಥಗಳನ್ನು ಬಯಸಬೇಡ, ಅದು ಮೋಸದ ಆಹಾರವೇ ಸರಿ. 4 ದುಡ್ಡಿನಾಸೆಯಿಂದ ದುಡಿಯಬೇಡ; ಸ್ವಬುದ್ಧಿಯನ್ನೇ ಆಶ್ರಯಿಸಬೇಡ. 5 ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ. 6 ಲೋಭಿಯ ಅನ್ನವನು ಉಣ್ಣದಿರು; ಅವನ ರುಚಿಪದಾರ್ಥಗಳನ್ನು ಬಯಸಬೇಡ. 7 ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ; ಉಣ್ಣು, ಕುಡಿ, ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ. 8 ನೀನು ತಿಂದ ತುತ್ತನ್ನು ಕಕ್ಕಿಬಿಡುವಿ; ನಿನ್ನ ಸವಿಮಾತುಗಳು ವ್ಯರ್ಥ. 9 ಮೂಢನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು. 10 ಪೂರ್ವಕಾಲದ ಮೇರೆಯನ್ನು ಒತ್ತಬೇಡ; ಅನಾಥರ ಹೊಲಗಳಲ್ಲಿ ನುಗ್ಗದಿರು. 11 ಅವರ ರಕ್ಷಕನು ಬಲಶಾಲಿಯಾಗಿದ್ದಾನೆ; ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು. 12 ಉಪದೇಶವನ್ನು ಮನಸ್ಸಿಗೆ ತೆಗೆದುಕೋ; ತಿಳುವಳಿಕೆಯ ಮಾತುಗಳಿಗೆ ಕಿವಿಗೊಡು. 13 ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ; ಬೆತ್ತದ ಏಟಿಗೆ ಸಾಯನು. 14 ಬೆತ್ತದಿಂದ ಹೊಡೆ; ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು. 15 ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವದು. 16 ಹೌದು, ನಿನ್ನ ತುಟಿಗಳು ನೀತಿಯನ್ನಾಡಿದರೆ ನನ್ನ ಅಂತರಾತ್ಮವು ಹಿಗ್ಗುವದು. 17 ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ; ಯೆಹೋವನಲ್ಲಿ ದಿನವೆಲ್ಲಾ ಭಯಭಕ್ತಿಯುಳ್ಳವನಾಗಿರು. 18 ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು. 19 ಕಂದಾ, ಕೇಳು, ಜ್ಞಾನವಂತನಾಗಿರು, ನಿನ್ನ ಮನಸ್ಸನ್ನು [ಜ್ಞಾನ] ಮಾರ್ಗದಲ್ಲಿ ಮುಂದೆ ನಡೆಯಿಸು. 20 ಕುಡುಕರಲ್ಲಿಯೂ ಅತಿಮಾಂಸಭಕ್ಷಕರಲ್ಲಿಯೂ ಸೇರದಿರು. 21 ಕುಡುಕನೂ ಹೊಟ್ಟೆಬಾಕನೂ ದುರ್ಗತಿಗೆ ಬರುವರು; ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವದು. 22 ಹೆತ್ತ ತಂದೆಯ ಮಾತಿಗೆ ಕಿವಿಗೊಡು; ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ. 23 ಸತ್ಯವನ್ನು ಎಂದರೆ ಜ್ಞಾನ ಸುಶಿಕ್ಷೆ ವಿವೇಕಗಳನ್ನು ಕೊಂಡುಕೋ; ಮಾರಿ ಬಿಡಬೇಡ. 24 ಧರ್ಮಿಯ ತಂದೆಯು ಅತಿ ಸಂತೋಷಪಡುವನು; ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು. 25 ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಆನಂದಪಡಲಿ. 26 ಕಂದಾ, ನನ್ನ ಕಡೆಗೆ ಮನಸ್ಸುಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ. 27 ಸೂಳೆಯು ಆಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ. 28 ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ, ಜನರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ. 29 ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು? 30 ವಿುಶ್ರಮದ್ಯಪಾನಾಸಕ್ತರಾಗಿ ದ್ರಾಕ್ಷಾರಸವನ್ನು ಕುಡಿಯುತ್ತಾ ಕಾಲಹರಣಮಾಡುವವರೇ. 31 ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು [ಗಂಟಲಿನೊಳಗೆ] ಮೆಲ್ಲಗೆ ಇಳಿದು ಹೋಗಿ 32 ಆಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗದ ಹಾಗೆ ಕಡಿಯುತ್ತದೆ. 33 ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವದು, ಮನಸ್ಸು ವಿಪರೀತಗಳನ್ನು ಹೊರಪಡಿಸುವದು. 34 ನೀನು ಸಮುದ್ರದ ನಡುವೆಯಾಗಲಿ ಹಡಗಿನ ಕಂಬದ ತುದಿಯಲ್ಲಾಗಲಿ ಮಲಗಿರುವವನಂತೆ ಇರುವಿ. 35 ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ; ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ. |
Kannada J.V. Bible © The Bible Society of India, 2016.
Used by permission. All rights reserved worldwide.
Bible Society of India