ರೋಮಾಪುರದವರಿಗೆ 13 - ಕನ್ನಡ ಸತ್ಯವೇದವು J.V. (BSI)ಅಧಿಕಾರಸ್ಥರಿಗೆ ಅಧೀನರಾಗಿರಬೇಕೆಂದು ಬೋಧನೆ 1 ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವರಿಂದ ನೇವಿುಸಲ್ಪಟ್ಟವರು. 2 ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗುವರು. 3 ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವದೇ ಹೊರತು ಒಳ್ಳೇ ಕೆಲಸ ಮಾಡುವವನಿಗೆ ಭಯವೇನೂ ಇಲ್ಲ. ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೇದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗಳಿಕೆಯುಂಟಾಗುವದು; 4 ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ. 5 ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿಗೆ ನ್ಯಾಯವಾಗಿ ತೋರುವದರಿಂದಲೂ ಅವನಿಗೆ ಅಧೀನನಾಗುವದು ಅವಶ್ಯ. 6 ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಕಂದಾಯ ಎತ್ತುವವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ. 7 ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು ಸಲ್ಲಿಸಿರಿ. ಧರ್ಮಶಾಸ್ತ್ರವೆಲ್ಲಾ ಪ್ರೀತಿಯಿಂದಲೇ ನೆರವೇರುವದು ಎಂಬ ಬೋಧನೆ 8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ಧರ್ಮಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ. 9 ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ. 10 ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಪ್ರಮಾಣವು ನೆರವೇರುತ್ತದೆ. ಸಂಪೂರ್ಣ ರಕ್ಷಣೋದಯ ಹತ್ತಿರಬಂದದರಿಂದ ನಾವು ಸಜ್ಜನರಾಗಿ ನಡೆದುಕೊಳ್ಳಬೇಕೆಂಬುವ ಬೋಧನೆ 11 ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ವಿಮೋಚನೆಯು ಹತ್ತಿರವಾಯಿತು. 12 ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. 13 ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ. 14 ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ. |
Kannada J.V. Bible © The Bible Society of India, 2016.
Used by permission. All rights reserved worldwide.
Bible Society of India