Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಯೋಬ 27 - ಕನ್ನಡ ಸಮಕಾಲಿಕ ಅನುವಾದ


ಯೋಬನ ಕೊನೆಯ ಮಾತುಗಳು

1 ಯೋಬನು ಮತ್ತೆ ತನ್ನ ಚರ್ಚೆಯನ್ನು ಮುಂದುವರಿಸಿ ಹೇಳಿದ್ದೇನೆಂದರೆ:

2 ನನ್ನ ನ್ಯಾಯವನ್ನು ತಪ್ಪಿಸಿದ ಜೀವಂತ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತರ ಆಣೆ,

3 “ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ; ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಆಡುತ್ತಿದೆ.

4 ನನ್ನ ತುಟಿಗಳು ಸುಳ್ಳನ್ನು ನುಡಿಯುವುದೇ ಇಲ್ಲ. ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವುದಿಲ್ಲ.

5 ನೀವು ನ್ಯಾಯವಂತರೆಂದು ನಾನು ಒಪ್ಪುವುದಿಲ್ಲ; ನಾನು ಸಾಯುವ ತನಕ, ನನ್ನ ಪ್ರಾಮಾಣಿಕತ್ವವನ್ನು ಬಿಡುವುದಿಲ್ಲ.

6 ನನ್ನ ನಿಷ್ಕಪಟತೆಯನ್ನು ದೃಢವಾಗಿ ಹಿಡುಕೊಂಡಿದ್ದೇನೆ; ಅದನ್ನು ಎಂದಿಗೂ ನಾನು ಹೋಗಗೊಡಿಸುವುದಿಲ್ಲ; ನಾನು ಜೀವಂತವಾಗಿ ಇರುವವರೆಗೂ ನನ್ನ ಮನಸ್ಸಾಕ್ಷಿಯು ನನ್ನನ್ನು ನಿಂದಿಸುವುದಿಲ್ಲ.

7 “ನನ್ನ ಶತ್ರು ದುಷ್ಟನ ಹಾಗಿರಲಿ; ನನ್ನ ವಿರುದ್ಧ ಏಳುವವನು ಅನ್ಯಾಯವಂತನ ಹಾಗಿರಲಿ.

8 ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ, ಅವನಿಗೆ ನಿರೀಕ್ಷೆ ಎಲ್ಲಿ?

9 ಭಕ್ತಿಹೀನನಿಗೆ ಯಾತನೆ ಬಂದರೆ, ದೇವರು ಅವನ ಮೊರೆಯನ್ನು ಕೇಳುವರೋ?

10 ಭಕ್ತಿಹೀನನು ಸರ್ವಶಕ್ತರಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿಯೂ ದೇವರನ್ನು ಕರೆಯುವನೋ?

11 “ನಾನು ದೇವರ ಶಕ್ತಿಯ ಬಗ್ಗೆ ನಿಮಗೆ ಬೋಧಿಸುವೆನು; ಸರ್ವಶಕ್ತರ ಮಾರ್ಗಗಳನ್ನು ನಾನು ಮರೆಮಾಡೆನು.

12 ನೀವೆಲ್ಲರೂ ಇದನ್ನು ನೋಡಿದ್ದರೂ, ಮತ್ತೆ ಏಕೆ ಈ ಪ್ರಕಾರ ವ್ಯರ್ಥವಾಗಿ ವಾದಿಸುತ್ತೀರಿ?

13 “ಇದು ದುಷ್ಟರಿಗೆ ದೇವರಿಂದ ಬಂದ ಪಾಲಾಗಿದೆ; ಹಿಂಸಕರಿಗೆ ಸರ್ವಶಕ್ತರಿಂದ ಹೊಂದುವ ಪಾಲು ಹೀಗಿರುತ್ತವೆ:

14 ಅವರ ಮಕ್ಕಳು ಹೆಚ್ಚಿದರೂ ಖಡ್ಗಕ್ಕೆ ಗುರಿಯಾಗುವರು; ಅವರ ಸಂತತಿಯವರಿಗೆ ಆಹಾರದ ಕೊರತೆ ಇರುವುದು.

15 ಅವರ ಮನೆಯಲ್ಲಿ ಯಾರಾದರೂ ಉಳಿದರೆ, ವ್ಯಾಧಿಯಿಂದ ಸತ್ತು ಸಮಾಧಿ ಸೇರುವರು; ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ.

16 ದುಷ್ಟರು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ, ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿಕೊಂಡಿದ್ದರೂ,

17 ಅವರು ಕೂಡಿಸಿಟ್ಟಿದ್ದನ್ನು ನೀತಿವಂತರು ಹಂಚಿಕೊಳ್ಳುವರು; ಅವರ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.

18 ದುಷ್ಟರು ಕಟ್ಟಿಕೊಂಡ ಮನೆಯು ಜೇಡ ಹುಳದ ಗೂಡಿನಂತೆಯೂ, ಕಾವಲುಗಾರನ ಗುಡಿಸಿಲಂತೆಯೂ ದುರ್ಬಲವಾಗಿರುವುದು.

19 ದುಷ್ಟರು ಧನಿಕರಾಗಿ ನಿದ್ರಿಸಿದರೂ ಮತ್ತೆ ನಿದ್ರೆಬಾರದು; ಅವರು ತಮ್ಮ ಕಣ್ಣನ್ನು ತೆರೆಯುತ್ತಲೇ ಆಸ್ತಿ ಇಲ್ಲವಾಗಿರುವುದು.

20 ವಿಪತ್ತುಗಳು ಪ್ರವಾಹದಂತೆ ಅಂಥವರನ್ನು ಹಿಡಿಯುವುವು; ರಾತ್ರಿಯಲ್ಲಿ ಬಿರುಗಾಳಿ ಅಂಥವರನ್ನು ಅಪಹರಿಸುವುದು.

21 ಪೂರ್ವದಿಕ್ಕಿನ ಗಾಳಿ ದುಷ್ಟರನ್ನು ಬಡಿಯಲು, ಅವರು ಕೊಚ್ಚಿಕೊಂಡು ಹೋಗುವರು; ಅದು ಅವರನ್ನು ಅವರ ಸ್ಥಳದಿಂದ ಹಾರಿಸಿಬಿಡುವುದು.

22 ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು.

23 ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.”

ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™

ಕೃತಿಸ್ವಾಮ್ಯ © 1999, 2020, 2022 Biblica, Inc.

ಅನುಮತಿಯೊಂದಿಗೆ ಬಳಸಲಾಗಿದೆ

ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

Holy Bible, Kannada Contemporary Version™

Copyright © 1999, 2020, 2022 by Biblica, Inc.

Used with permission. All rights reserved worldwide.

Biblica, Inc.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು